ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದ ಟೆಕ್ಕಿ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ; ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ ಪೊಲೀಸರು.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ಟೆಕ್ಕಿ 12ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಯುವತಿ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಎಂದು ತಿಳಿದುಬಂದಿದೆ.
ಈ ಘಟನೆ ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಹರಳೂರು ಕೂಡ್ಲೂ ರಸ್ತೆಯಲ್ಲಿರುವ ಎಸ್ಎನ್ಎನ್ ರಾಜ್ ಎಟರ್ನಿಯಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತ ಯುವಕನನ್ನು ಮಾಯಾಂಕ್ ರಜನಿ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶ ಮೂಲದವರಾಗಿದ್ದಾನೆ.
ಮಾಯಾಂಕ್ ರಜನಿ ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಬಾಡಿಗೆಗೆ ಪಡೆದು ವಾಸಿಸುತ್ತಿದ್ದನು. ಕಳೆದ ಎರಡು ವರ್ಷಗಳಿಂದ ಯುವತಿಯೊಂದಿಗೆ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದನು. ಮುಂಜಾನೆ 5 ಗಂಟೆ ಸುಮಾರಿಗೆ ಮಾಯಾಂಕ್ 12ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ.
ಅವನ ಮೃತದೇಹ ನೋಡಿದ ಸೆಕ್ಯೂರಿಟಿ ಗಾರ್ಡ್ 12ನೇ ಮಹಡಿಗೆ ಓಡಿಹೋಗಿ ಬಾಗಿಲು ಬಡಿದು ಯುವತಿಯನ್ನು ಎಚ್ಚರಿಸಿದ್ದಾನೆ. ಘಟನೆಯಿಂದ ಯುವತಿಯೂ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಮಾಯಾಂಕ್ ರಜನಿ ಬೆಂಗಳೂರಿನಲ್ಲಿ ಸ್ಟಾರ್ಟ್ಅಪ್ ಕಂಪನಿಯೊಂದನ್ನು ಪ್ರಾರಂಭಿಸಿದ್ದರು. ಆದರೆ ಅದು ನಷ್ಟದಲ್ಲಿತ್ತು ಎನ್ನಲಾಗಿದೆ. ಹೀಗಾಗಿ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.