ಹಾವೇರಿ :ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಧರ್ಮದೇಟು!

ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಓರ್ವ ಶಿಕ್ಷಕನಿಗೆ ಸ್ಥಳೀಯರು ಮತ್ತು ಪೋಷಕರು ಧರ್ಮದೇಟು ನೀಡಿ, ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ.
ಸವಣೂರಿನ ಸರ್ಕಾರಿ ಉರ್ದು ಉನ್ನತೀಕರಿಸಿದ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಶಾಲೆಯ ಶಿಕ್ಷಕ ಜಗದೀಶ್ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಶಿಕ್ಷಕನ ಈ ಹೇಯ ಕೃತ್ಯ ತಿಳಿದು ತೀವ್ರ ಆಕ್ರೋಶಗೊಂಡ ಪೋಷಕರು ಮತ್ತು ಸ್ಥಳೀಯ ಸಾರ್ವಜನಿಕರು ಶಾಲಾ ಆವರಣಕ್ಕೆ ಧಾವಿಸಿದ್ದಾರೆ.
ಆರೋಪಿ ಶಿಕ್ಷಕ ಜಗದೀಶ್ನನ್ನು ಹಿಡಿದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಕಾಮುಕ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಆಕ್ರೋಶ ಭರಿತರಾದ ಪೋಷಕರು ಮತ್ತು ಸ್ಥಳೀಯರು, ಶಾಲೆ ಆವರಣದಿಂದಲೇ ಶಿಕ್ಷಕನಿಗೆ ಹೊಡೆಯುತ್ತಾ, ಪಟ್ಟಣದಲ್ಲಿ ಮೆರವಣಿಗೆ ಮಾಡಿ, ಬಳಿಕ ಸವಣೂರು ಪೊಲೀಸ್ ಠಾಣೆಯವರೆಗೆ ಕರೆದುಕೊಂಡು ಬಂದಿದ್ದಾರೆ.
ಶಿಕ್ಷಕ ಜಗದೀಶಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ಪೋಷಕರು ಮತ್ತು ಸಾರ್ವಜನಿಕರು, ಧರ್ಮದೇಟು ನೀಡಿದ ನಂತರ ಆರೋಪಿಯನ್ನು ಸವಣೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.